ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಜಾನುವಾರು ಸಾಗಾಟ ಪ್ರಕರಣಕ್ಕೆ (ಅ.ಕ್ರ: 115/2025) ಸಂಬಂಧಿಸಿದಂತೆ, ವಾಹನದಲ್ಲಿ ಸಾಗಿಸುತ್ತಿದ್ದ ಜಾನುವಾರುಗಳ ಖರೀದಿಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದ ದಾಖಲೆಗಳು (ರಶೀದಿಗಳು) ಸುಳ್ಳು ಎಂದು ದೃಢಪಟ್ಟಿದೆ. ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರ ವಿಚಾರಣೆಯ ಪ್ರಕಾರ, ಆ ಪ್ರದೇಶದಲ್ಲಿ ಶುಕ್ರವಾರದಂದು ಮಾತ್ರ ಜಾನುವಾರು ಸಂತೆ ನಡೆಯುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ರಶೀದಿ ಕ್ರಮ ಸಂಖ್ಯೆ: 27653 ಹಾಗೂ 27654 ಗಳನ್ನು ತಿದ್ದಿ, ಸುಳ್ಳು ಸೃಷ್ಟಿಸಿ ಪ್ರಸಾರ ಮಾಡಿರುವುದು ಕಂಡುಬಂದಿದೆ. ಇದರ ಜೊತೆಗೆ, ಆರ್ಟಿಓ ಅಧಿಕಾರಿಗಳು ಮತ್ತು ಪಶು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದ್ದು, ಆ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲು ಯಾವುದೇ ಅನುಮತಿ ನೀಡಿರುವುದಿಲ್ಲವೆಂದು ತಿಳಿದುಬಂದಿದೆ.
ಈ ರೀತಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಅವು ನೈಜವಲ್ಲವೆಂದು ತಿಳಿದಿದ್ದರೂ ಸಹ, ಆರೋಪಿಗಳನ್ನು ರಕ್ಷಿಸುವ ದುರುದ್ದೇಶದಿಂದ "State office SDPI Karnataka" ಹೆಸರಿನ 'X' ಖಾತೆದಾರರು, Thejasnews.com ನ ಮಾಲಕ/ಸಂಪಾದಕ ಮತ್ತು Sadath Bajathur ಎಂಬುವರು ಹಾಗೂ ಇತರೆ ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದಾರೆ. ಈ ಸುಳ್ಳು ಪ್ರಚಾರವು ಸಾರ್ವಜನಿಕರಲ್ಲಿ ಉದ್ವೇಗವನ್ನು ಉಂಟುಮಾಡಿ, ಜನರು ಗುಂಪು ಕೂಡಿ ದೊಂಬಿಯಂತಹ ಅಪರಾಧ ನಡೆಸಲು ಸನ್ನಿವೇಶವನ್ನು ಸೃಷ್ಟಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಗಂಭೀರ ಸ್ವರೂಪದ ಕೃತ್ಯಕ್ಕೆ ಸಂಬಂಧಿಸಿದಂತೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ 05.11.2025 ರಂದು ಪ್ರತ್ಯೇಕ ಪ್ರಕರಣ (ಅ.ಕ್ರ: 123/2025) ದಾಖಲಾಗಿದ್ದು, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ರ ವಿವಿಧ ಕಲಂಗಳ ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ದಿನಗಳಲ್ಲಿ ಕೂಡಾ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಪೋಸ್ಟ್ಗಳನ್ನು ಪ್ರಸಾರ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ತಿಳಿಸಲಾಗಿದೆ. ಆದ್ದರಿಂದ, ಸಾಮಾಜಿಕ ಜಾಲತಾಣ ಬಳಕೆದಾರರು ಜವಾಬ್ದಾರಿಯುತವಾಗಿ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.

0 Comments