ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್; 2026ರ ಐಪಿಎಲ್‌ಗೆ ಸಂಪುಟ ಸಭೆಯಿಂದ ಗ್ರೀನ್‌ ಸಿಗ್ನಲ್!

 

Ad
ಕೋಟಿಗಟ್ಟಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ರಾಜ್ಯ ಸರ್ಕಾರವು ಬಹುದೊಡ್ಡ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಸಚಿವ ಸಂಪುಟವು ಬಹುತೇಕ ಒಪ್ಪಿಗೆ ಸೂಚಿಸಿದೆ.

ಕಳೆದ ಜುಲೈನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ದುರಂತ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಕಾರಣದಿಂದಾಗಿ, ಮಹಿಳಾ ವಿಶ್ವಕಪ್ ಪಂದ್ಯಾವಳಿಯ ಅವಕಾಶ ಕೂಡ ಬೆಂಗಳೂರಿಗೆ ಕೈತಪ್ಪಿ ಹೋಗಿತ್ತು.

ಈ ಹಿನ್ನೆಲೆಯಲ್ಲಿ, ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಮೈಕೆಲ್ ಡಿ ಕುನ್ಹಾ ವರದಿಯ ಶಿಫಾರಸುಗಳನ್ನು ಅಳವಡಿಸಿಕೊಂಡು, ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಪಂದ್ಯಗಳನ್ನು ನಡೆಸಲು ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಮತ್ತು ಸೂಕ್ತ ಭದ್ರತೆ ಒದಗಿಸುವ ಬಗ್ಗೆಯೂ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಲಾಯಿತು. ಪಂದ್ಯದ ವೇಳೆ ಅನುಸರಿಸಬೇಕಾದ ನಿರ್ದಿಷ್ಟ ಕ್ರಮಗಳ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (KSCA) ಯವರು ಗೃಹ ಇಲಾಖೆಯೊಂದಿಗೆ ಚರ್ಚಿಸಿ, ಬಳಿಕ ಗೃಹ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ. ಈ ನಿರ್ಧಾರದಿಂದ ಬೆಂಗಳೂರಿನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ ಮರಳುವ ನಿರೀಕ್ಷೆ ಇದೆ.

Post a Comment

0 Comments